Kshetra Samachara
ಕಾಪು :ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷೆ ಪ್ರಭಾ ಶೆಟ್ಟಿಯವರ ನೇತೃತ್ವದಲ್ಲಿ ಪೆಟ್ರೋಲ್ ಹಾಗೂ ಇತರ ಇಂಧನಗಳ ಬೆಲೆಯನ್ನು ಏರಿಸಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಟಪಾಡಿ ಹಾಗೂ ಕಾಪು ಪೇಟೆಯಲ್ಲಿರುವ ಪೆಟ್ರೋಲ್ ಬಂಕ್ ಗಳ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಲಟ್ಟಣಿಗೆ, ಸೌಟು ಹಾಗೂ ಬಟ್ಟಲುಗಳನ್ನು ಕೈಯಲ್ಲಿ ಹಿಡಿದು ಶಬ್ಧ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಅವರು ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿಯ ಆಡಳಿತ ಪ್ರಾರಂಭವಾದಂದಿನಿಂದ ಯಾವುದೇ ಎಗ್ಗಿಲ್ಲದೆ ಬಡಜನರನ್ನು ಲೂಟಿ ಮಾಡುವ ಕೆಲಸಕ್ಕೆ ಕೈಹಾಕಿದೆ.ಅಚ್ಛೇ ದಿನ್ ಕೊಡುತ್ತೇವೆಂದು ಆಸೆ ಹುಟ್ಟಿಸಿ ಇದೀಗ ಅವರ ಬದುಕನ್ನೇ ದುಸ್ಥಿತಿಗೆ ತಂದು ನಿಲ್ಲಿಸಿದೆ.ಇದೀಗ ಕೊರೋನಾ ಮಹಾಮಾರಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಗಾಯದ ಮೇಲೆ ಬರೆ ಇಟ್ಟಂತೆ ಪೆಟ್ರೋಲ್ ಮತ್ತು ಇತರ ಇಂಧನಗಳ ಬೆಲೆಯನ್ನು ವಿಪರೀತ ಹೆಚ್ಚಿಸಿ, ಮತ್ತೊಮ್ಮೆ ದೊಡ್ಡ ಹೊಡೆತವನ್ನೇ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪ್ರಭಾ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಶ್ರೀಮತಿ ಆಗ್ನೇಸ್ ಡೇಸಾ ಅವರು ಧನ್ಯವಾದವಿತ್ತರು.ಕಟಪಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಇಂದಿರಾ ಆಚಾರ್ಯ,ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಮತಿ ಆಶಾ ಅಂಚನ್,ಪಂಚಾಯತ್ ಸದಸ್ಯರಾದ ಶ್ರೀಮತಿ ಫ್ಲಾವಿಯಾ,ತ್ರಿವೇಣಿ, ಸುಗುಣ ಪೂಜಾರ್ತಿ,ಮುಂತಾದವರು ಉಪಸ್ಥಿತರಿದ್ದರು.