Kshetra Samachara
ಹುಬ್ಬಳ್ಳಿ:ಇಂಧನ ಬೆಲೆ ಏರಿಕೆಯ ಮೂಲಕ ಗಾಯದ ಮೇಲೆ ಬರೆ ಎಳೆದ ಸರ್ಕಾರದ ನಿರ್ಧಾರ ಹಾಗೂ ವಿದ್ಯುತ್ ದರ ಏರಿಕೆ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದಿಂದ ಆನ್ ಲೈನ್ ಪ್ರತಿಭಟನೆ ನಡೆಸಲಾಯಿತು.
ಕೋವಿಡ್ ಸಂಕಷ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೇ, ವಿದ್ಯುತ್ ದರ ಏರಿಕೆಯ ಅಮಾನವೀಯವಾಗಿದೆ. ಈ ನಡೆಯನ್ನು ಖಂಡಿಸಿ ಧಾರವಾಡ ಜಿಲ್ಲೆಯಾದ್ಯಂತ ಆನ್ ಲೈನ್ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿ ಯೂನಿಟ್ ಗೆ ಸರಾಸರಿ 30 ಪೈಸೆಯಂತೆ ಏರಿಕೆ ಮಾಡಿದ್ದು ಸರಿಯಲ್ಲ. ಜೊತೆಗೆ ನಿಗದಿತ ಠೇವಣಿ ಮೊತ್ತವನ್ನೂ ಏರಿಕೆ ಮಾಡಲಾಗಿದೆ. ಈಗಾಗಲೇ ಕೋವಿಡ್ ಲಾಕ್ ಡೌನ್ ಕಾರಣಕ್ಕೆ ತಮ್ಮ ಉದ್ಯೋಗ, ಆದಾಯ ಕಳೆದುಕೊಂಡಿರುವ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೇರೆ ಕೆಲವು ರಾಜ್ಯಗಳಲ್ಲಿ ವಿದ್ಯುತ್, ನೀರಿನ ಶುಲ್ಕಗಳ ಪಾವತಿಯನ್ನು ರದ್ದುಗೊಳಿಸಲಾಗಿದೆ. ನಮ್ಮ ರಾಜ್ಯದಲ್ಲಿ ಪೂರ್ವಾನ್ವಯವಾಗುವಂತೆ ದರ ಏರಿಕೆ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ನಷ್ಟ ಸರಿದೂಗಿಸಲು ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚಗಳನ್ನು ತಡೆಗಟ್ಟುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿತ್ತು. ಕೋವಿಡ್ ಪರಿಹಾರದ ಹೆಸರಿನಲ್ಲಿ ಒಂದು ಕೈಯಲ್ಲಿ ಪುಡಿಗಾಸನ್ನು ನೀಡಿ ಇನ್ನೊಂದು ಕೈಯಲ್ಲಿ ಈ ರೀತಿ ವಿದ್ಯುತ್, ಪೆಟ್ರೋಲ್ ಗಳ ಮೂಲಕ ಸುಲಿಗೆ ಮಾಡುವುದು ಜನಪರ ಸರ್ಕಾರದ ಲಕ್ಷಣವೇ..? ವಿದ್ಯುತ್ ದರ ಏರಿಕೆಯ ಈ ಜನವಿರೋಧಿ ತೀರ್ಮಾನವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕೆಂದು ಒತ್ತಾಯಿಸಿದರು.