Public News
ಮಡಿಕೇರಿ: ತೀವ್ರ ಹಲ್ಲೆಗೊಳಗಾಗಿ ಪಟ್ಟಣದ ಚಿಕ್ಕಪೇಟೆ ನಿವಾಸಿ ರಾಯ್ ಡಿಸೋಜಾ (50) ಅವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಎಂಟು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಪೊಲೀಸರ ಹಲ್ಲೆಯಿಂದಲೇ ರಾಯ್ ಅವರು ಮೃತಪಟ್ಟಿದ್ದಾಗಿ ಕುಟುಂಬದ ಸದಸ್ಯರು, ಸಮುದಾಯದ ಮುಖಂಡರು ಆರೋಪಿಸಿದ್ದ ಬೆನ್ನಲೇ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಶನಿವಾರ ರಾತ್ರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲ್ನೋಟಕ್ಕೆ ತಪ್ಪಿತಸ್ಥ ಹೆಡ್ ಕಾನ್ಸ್ಟೇಬಲ್ ಸೇರಿ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತುಗೊಳಿಸಿದ್ದಾರೆ. ಜೊತೆಗೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಏನಿದು ಪ್ರಕರಣ?:
ರಾಯ್ ಅವರು ಜೂನ್ 9ರ ಮಧ್ಯರಾತ್ರಿ ಕತ್ತಿ ಹಿಡಿದುಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕರ್ತವ್ಯದಲ್ಲಿದ್ದ ಪೊಲೀಸರು ತಡೆದಿದ್ದಾರೆ. ಆಗ ರಾಯ್, ಪೊಲೀಸರ ಮೇಲೆ ಕತ್ತಿ ಬೀಸಿದ್ದಾರೆ ಎನ್ನಲಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಕೈಗೆ ಗಾಯವಾಗಿತ್ತು. ನಂತರ ಪೊಲೀಸರು ಅವರನ್ನು ಠಾಣೆಗೆ ಕರೆತಂದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಂದು ರಾತ್ರಿಯೇ ಅವರ ತಾಯಿಯನ್ನು ಠಾಣೆಗೆ ಕರೆಯಿಸಿ, ಹಲ್ಲೆಯಿಂದ ಗಾಯಗೊಂಡಿದ್ದ ಅವರನ್ನು ಕಳುಹಿಸಿದ್ದರು. ರಾಯ್ ಅವರು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ತಿಳಿದುಬಂದಿದೆ.
ಬಳಿಕ ರಾಯ್ ಕುಟುಂಬದವರು ಪಟ್ಟಣದಲ್ಲಿನ ಆಸ್ಪತ್ರೆಯೊಂದರಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಶುಕ್ರವಾರ ಕರೆದೊಯ್ದಿದ್ದರು. ಹಲ್ಲೆಯಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ರಾಯ್ ಡಿಸೋಜಾ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದರು.